Print Page Options
Previous Prev Day Next DayNext

Revised Common Lectionary (Semicontinuous)

Daily Bible readings that follow the church liturgical year, with sequential stories told across multiple weeks.
Duration: 1245 days
Kannada Holy Bible: Easy-to-Read Version (KERV)
Version
ಕೀರ್ತನೆಗಳು 28

ರಚನೆಗಾರ: ದಾವೀದ.

28 ಯೆಹೋವನೇ, ನೀನೇ ನನ್ನ ಬಂಡೆ.
    ಸಹಾಯಕ್ಕಾಗಿ ನಾನು ನಿನ್ನನ್ನು ಕೂಗಿಕೊಳ್ಳುತ್ತಿದ್ದೇನೆ.
    ನನ್ನ ಪ್ರಾರ್ಥನೆಗಳಿಗೆ ಕಿವಿಗಳನ್ನು ಮುಚ್ಚಿಕೊಳ್ಳಬೇಡ.
ಇಲ್ಲವಾದರೆ ಸತ್ತು ಸಮಾಧಿಯಲ್ಲಿರುವವರಂತೆ
    ಜನರು ನನ್ನನ್ನು ಪರಿಗಣಿಸುವರು.
ಮಹಾಪವಿತ್ರ ಸ್ಥಳದ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು.
    ನಾನು ನಿನ್ನನ್ನು ಕೂಗಿಕೊಳ್ಳುವಾಗ ನನಗೆ ಕಿವಿಗೊಟ್ಟು ಕರುಣಿಸು.
ನನ್ನನ್ನು ಆ ಕೆಟ್ಟವರೊಂದಿಗೆ ಲೆಕ್ಕಿಸಬೇಡ.
    ಅವರು ತಮ್ಮ ನೆರೆಯವರಿಗೆ “ಸಮಾಧಾನವಾಗಲಿ” ಎಂದು ಹರಸಿದರೂ ಅವರ ವಿರೋಧವಾಗಿ ಸಂಚುಗಳನ್ನು ಮಾಡುತ್ತಾರೆ.[a]
ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು.
    ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು.
    ಅವರಿಗೆ ತಕ್ಕ ದಂಡನೆಯನ್ನು ಕೊಡು.
ಯೆಹೋವನ ಕಾರ್ಯಗಳನ್ನೂ ಆತನ ಕೈಕೆಲಸಗಳನ್ನೂ
    ಕೆಡುಕರು ವಿವೇಚಿಸಿ ತಿಳಿದುಕೊಳ್ಳುವುದಿಲ್ಲ.
ಆದ್ದರಿಂದ ಆತನು ಅವರನ್ನು ದಂಡಿಸಿ
    ನಿತ್ಯನಾಶಮಾಡುವನು.

ಯೆಹೋವನಿಗೆ ಸ್ತೋತ್ರವಾಗಲಿ!
    ಆತನು ನನ್ನ ಪ್ರಾರ್ಥನೆಯನ್ನು ಕೇಳಿದ್ದಾನೆ.
ಯೆಹೋವನೇ ನನಗೆ ಬಲವೂ ಗುರಾಣಿಯೂ ಆಗಿದ್ದಾನೆ.
    ನಾನು ಆತನಲ್ಲಿ ಭರವಸವಿಟ್ಟಿರುವುದರಿಂದ ಆತನು ನನಗೆ ಸಹಾಯಮಾಡಿದನು.
ಆದಕಾರಣ ನನ್ನ ಹೃದಯವು ಹರ್ಷಿಸುವುದು;
    ನಾನು ಸ್ತುತಿಗೀತೆಗಳನ್ನು ಹಾಡುತ್ತಾ ಆತನನ್ನು ಕೊಂಡಾಡುವೆನು.
ಯೆಹೋವನು ತನ್ನ ಜನರಿಗೆ ಬಲವೂ
    ತಾನು ಆರಿಸಿಕೊಂಡ ಅರಸನಿಗೆ ಆಶ್ರಯದುರ್ಗವೂ ಆಗಿದ್ದಾನೆ.

ಯೆಹೋವನೇ, ನಿನ್ನ ಜನರನ್ನು ರಕ್ಷಿಸು,
    ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು!
    ಅವರಿಗೆ ಕುರುಬನಾಗಿದ್ದು ಸದಾಕಾಲ ಅವರನ್ನು ಪರಿಪಾಲಿಸು.

ಯೆರೆಮೀಯ 31:10-14

10 “ಜನಾಂಗಗಳೇ, ಯೆಹೋವನ ಈ ಸಂದೇಶವನ್ನು ಕೇಳಿರಿ.
ಈ ಸಂದೇಶವನ್ನು ಸಮುದ್ರದಡದ ದೂರದೂರದ ಪ್ರದೇಶಗಳಲ್ಲಿ ತಿಳಿಸಿರಿ.
‘ಇಸ್ರೇಲರನ್ನು ಚದರಿಸಿದಾತನು
    ಅವರನ್ನು ಮತ್ತೆ ಒಟ್ಟುಗೂಡಿಸುವನು.
ಆತನು ತನ್ನ ಹಿಂಡನ್ನು ಕುರುಬನಂತೆ
    ನೋಡಿಕೊಳ್ಳುವನು’ ಎಂದು ಹೇಳಿರಿ.
11 ಯೆಹೋವನು ಯಾಕೋಬ್ಯರನ್ನು ಹಿಂದಕ್ಕೆ ಕರೆದುಕೊಂಡು ಬರುವನು.
    ಯೆಹೋವನು ತನ್ನ ಜನರನ್ನು ಅವರಿಗಿಂತಲೂ ಬಲಿಷ್ಠರಾದ ಜನರಿಂದ ರಕ್ಷಿಸುವನು.
12 ಇಸ್ರೇಲಿನ ಜನರು ಚೀಯೋನ್ ಶಿಖರಕ್ಕೆ ಬರುವರು;
    ಸಂತೋಷದಿಂದ ನಲಿದಾಡುವರು.
ದೇವರು ಅವರಿಗೆ ಅನುಗ್ರಹಿಸುವ ಎಲ್ಲಾ ಶ್ರೇಷ್ಠವಾದ ವಸ್ತುಗಳಿಂದ
    ಸಂತೋಷಚಿತ್ತರಾದ ಅವರ ಮುಖಗಳು ಪ್ರಕಾಶಮಾನವಾಗುವವು.
ಯೆಹೋವನು ಅವರಿಗೆ ಧಾನ್ಯ, ಹೊಸ ದ್ರಾಕ್ಷಾರಸ,
    ಎಣ್ಣೆ, ಕುರಿಮರಿಗಳು ಮತ್ತು ಹಸುಗಳನ್ನು ದಯಪಾಲಿಸುವನು.
ಅವರು ಸಾಕಷ್ಟು ನೀರಿರುವ ತೋಟದಂತೆ ಲವಲವಿಕೆಯಿಂದ ಇರುವರು.
    ಇಸ್ರೇಲರು ಇನ್ನು ಯಾವ ತೊಂದರೆಗೂ ಒಳಗಾಗುವುದಿಲ್ಲ.
13 ಆಗ ಇಸ್ರೇಲಿನ ತರುಣಿಯರು
    ಸಂತೋಷದಿಂದ ನರ್ತಿಸುವರು.
ತರುಣರು ಮತ್ತು ವೃದ್ಧರು
    ಆ ನರ್ತನದಲ್ಲಿ ಭಾಗವಹಿಸುವರು.
ನಾನು ಅವರ ದುಃಖವನ್ನು ಸಂತೋಷವಾಗಿ ಪರಿವರ್ತಿಸುವೆನು.
    ನಾನು ಇಸ್ರೇಲರನ್ನು ಸಂತೈಸುವೆನು.
    ಅವರ ದುಃಖವನ್ನು ಹೋಗಲಾಡಿಸಿ ಅವರನ್ನು ಸಂತೋಷಪಡಿಸುವೆನು.
14 ಯಾಜಕರು ತಮಗೆ ಬೇಕಾಗುವದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೈವೇದ್ಯಗಳನ್ನು ಪಡೆಯುವರು.
    ನಾನು ಅವರಿಗೆ ಕೊಡುವ ಉತ್ತಮ ವಸ್ತುಗಳನ್ನು ಮನದಣಿಯುವ ಹಾಗೆ ಅನುಭವಿಸಿ ನನ್ನ ಜನರು ತೃಪ್ತಿಪಡುವರು.”
ಇದು ಯೆಹೋವನ ನುಡಿ.

ಯೋಹಾನ 5:19-40

ಯೇಸುವಿಗೆ ದೇವರ ಅಧಿಕಾರವಿದೆ

19 ಅದಕ್ಕೆ ಉತ್ತರವಾಗಿ ಆತನು ಹೀಗೆಂದನು: “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಮಗನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ತಂದೆಯು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ತಂದೆಯು ಮಾಡುವ ಕಾರ್ಯಗಳನ್ನೇ ಮಗನೂ ಮಾಡುತ್ತಾನೆ. 20 ತಂದೆಯು ಮಗನನ್ನು ಪ್ರೀತಿಸುವನು ಮತ್ತು ತಾನು ಮಾಡುವ ಎಲ್ಲಾ ಕಾರ್ಯಗಳನ್ನು ಮಗನಿಗೆ ತೋರಿಸುವನು. ಆದರೆ ಇದಕ್ಕಿಂತಲೂ ಹೆಚ್ಚಿನ ಕಾರ್ಯಗಳನ್ನು ತಂದೆಯು ಮಗನಿಗೆ ತೋರಿಸುವನು. ಆಗ ನೀವೆಲ್ಲರೂ ಆಶ್ಚರ್ಯಚಕಿತರಾಗುವಿರಿ. 21 ತಂದೆಯು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವ ಕೊಡುತ್ತಾನೆ. ಅದೇ ರೀತಿಯಲ್ಲಿ ಮಗನು ತಾನು ಬಯಸಿದವರಿಗೆ ಜೀವವನ್ನು ಕೊಡುತ್ತಾನೆ.

22 “ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತಂದೆಯು ತೀರ್ಪು ಮಾಡುವ ಅಧಿಕಾರವನ್ನೆಲ್ಲಾ ಮಗನಿಗೆ ಕೊಟ್ಟಿದ್ದಾನೆ. 23 ಜನರು ತಂದೆಯನ್ನು ಗೌರವಿಸುವಂತೆ ಮಗನನ್ನು ಗೌರವಿಸಬೇಕೆಂದು ದೇವರು ಹೀಗೆ ಮಾಡಿದನು. ಮಗನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿರುವ ತಂದೆಯನ್ನೂ ಸನ್ಮಾನಿಸದವನಾಗಿದ್ದಾನೆ.

24 “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ಮಾತನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅವನಿಗೆ ಅಪರಾಧಿಯೆಂಬ ತೀರ್ಪಾಗುವುದಿಲ್ಲ. ಅವನು ಈಗಾಗಲೇ ಮರಣವನ್ನು ದಾಟಿ ಜೀವಕ್ಕೆ ಪ್ರವೇಶಿಸಿದ್ದಾನೆ. 25 ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು. 26 ತಂದೆಯು ಜೀವಕೊಡುವ ಶಕ್ತಿಯನ್ನು ತಾನು ಹೊಂದಿರುವಂತೆ ಮಗನಿಗೂ ಜೀವಕೊಡುವ ಶಕ್ತಿಯನ್ನು ಅನುಗ್ರಹಿಸಿದನು, 27 ಮತ್ತು ಎಲ್ಲಾ ಜನರಿಗೆ ತೀರ್ಪುಮಾಡುವ ಅಧಿಕಾರವನ್ನು ತಂದೆಯು ಮಗನಿಗೂ ಕೊಟ್ಟಿದ್ದಾನೆ. ಏಕೆಂದರೆ ಆ ಮಗನು ಮನುಷ್ಯಕುಮಾರನಾಗಿದ್ದಾನೆ.

28 “ಇದರ ಬಗ್ಗೆ ಆಶ್ಚರ್ಯಪಡಬೇಡಿರಿ. ಏಕೆಂದರೆ ಸಮಾಧಿಗಳಲ್ಲಿರುವ ಜನರೆಲ್ಲರೂ ಆತನ ಸ್ವರವನ್ನು ಕೇಳುವ ಕಾಲ ಬರುತ್ತದೆ. 29 ಆಗ ಅವರು ತಮ್ಮ ಸಮಾಧಿಗಳಿಂದ ಎದ್ದುಬರುವರು. ಜೀವನದಲ್ಲಿ ಒಳ್ಳೆಯದನ್ನು ಮಾಡಿದ ಜನರು ಪುನರುತ್ಥಾನಗೊಂಡು ನಿತ್ಯಜೀವವನ್ನು ಹೊಂದಿಕೊಳ್ಳುವರು. ಆದರೆ ಕೆಟ್ಟದ್ದನ್ನು ಮಾಡಿದವರಿಗೆ ತೀರ್ಪಿಗಾಗಿ ಪುನರುತ್ಥಾನವಾಗುವುದು.

30 “ನಾನು ಒಬ್ಬಂಟಿಗನಾಗಿ ಏನೂ ಮಾಡಲಾರೆನು. ನಾನು ಕೇಳಿದ್ದಕ್ಕನುಸಾರವಾಗಿ ತೀರ್ಪು ಮಾಡುತ್ತೇನೆ. ಆದ್ದರಿಂದ ನನ್ನ ತೀರ್ಪು ಸರಿಯಾದದ್ದು. ಏಕೆಂದರೆ, ನಾನು ನನ್ನನ್ನು ಮೆಚ್ಚಿಸಲು ಪ್ರಯತ್ನಿಸದೆ ನನ್ನ ತಂದೆಯನ್ನು ಮೆಚ್ಚಿಸಲು ಪ್ರಯತ್ನಿಸುತ್ತೇನೆ.

ಯೆಹೂದ್ಯ ನಾಯಕರಿಗೆ ಯೇಸು ಹೇಳಿದ ಅಧಿಕ ವಿಷಯಗಳು

31 “ನನ್ನ ವಿಷಯವಾಗಿ ನಾನೇ ಹೇಳಿಕೊಂಡರೆ, ನನ್ನ ಸಾಕ್ಷಿಯು ಸತ್ಯವಾದದ್ದಲ್ಲ. 32 ಆದರೆ ನನ್ನ ವಿಷಯವಾಗಿ ಜನರಿಗೆ ಹೇಳುವ ಮತ್ತೊಬ್ಬ ವ್ಯಕ್ತಿಯಿದ್ದಾನೆ. ನನ್ನ ಬಗ್ಗೆ ಅವನು ಹೇಳುವ ಸಂಗತಿಗಳು ಸತ್ಯವಾಗಿವೆಯೆಂದು ನನಗೆ ಗೊತ್ತಿದೆ.

33 “ನೀವು ಯೋಹಾನನ ಬಳಿಗೆ ಜನರನ್ನು ಕಳುಹಿಸಿದ್ದಿರಿ. ಅವನು ನಿಮಗೆ ಸತ್ಯದ ಬಗ್ಗೆ ತಿಳಿಸಿದನು. 34 ಆದರೆ ನನ್ನ ಬಗ್ಗೆ ಜನರಿಗೆ ತಿಳಿಸುವುದಕ್ಕಾಗಿ ನನಗೆ ಮನುಷ್ಯನೊಬ್ಬನ ಅಗತ್ಯವಿಲ್ಲ. ಆದರೆ ನಿಮಗೆ ರಕ್ಷಣೆಯಾಗಬೇಕೆಂದು ನಾನು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. 35 ಯೋಹಾನನು ಉರಿಯುವ ದೀಪದಂತೆ ಬೆಳಕನ್ನು ಕೊಟ್ಟನು ಮತ್ತು ನೀವು ಅವನ ಬೆಳಕನ್ನು ಸ್ವಲ್ಪಕಾಲ ಸಂತೋಷದಿಂದ ಅನುಭವಿಸಿದಿರಿ.

36 “ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ. 37 ಅಲ್ಲದೆ ನನ್ನನ್ನು ಕಳುಹಿಸಿದ ತಂದೆಯು ನನ್ನ ಬಗ್ಗೆ ತಾನೇ ಸಾಕ್ಷಿ ಕೊಟ್ಟಿದ್ದಾನೆ. ಆದರೆ ನೀವು ಆತನ ಧ್ವನಿಯನ್ನು ಎಂದೂ ಕೇಳಿಲ್ಲ. ಆತನು ಹೇಗಿದ್ದಾನೆ ಎಂಬುದನ್ನು ನೀವು ಎಂದೂ ಕಂಡಿಲ್ಲ. 38 ತಂದೆಯ ಉಪದೇಶವು ನಿಮ್ಮಲ್ಲಿ ನೆಲೆಸಿಲ್ಲ. ಏಕೆಂದರೆ ತಂದೆಯು ಕಳುಹಿಸಿರುವಾತನನ್ನು ನೀವು ನಂಬುವುದಿಲ್ಲ. 39 ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ! 40 ಆದರೆ ನೀವು ಬಯಸುವ ಆ ಜೀವವನ್ನು ನನ್ನ ಬಳಿಗೆ ಬಂದು ಹೊಂದಿಕೊಳ್ಳಲು ನಿಮಗೆ ಇಷ್ಟವಿಲ್ಲ.

Kannada Holy Bible: Easy-to-Read Version (KERV)

Kannada Holy Bible: Easy-to-Read Version. All rights reserved. © 1997 Bible League International