Revised Common Lectionary (Semicontinuous)
ದೇವಾಲಯಕ್ಕೆ ಹೋಗುವಾಗ ಹಾಡುವ ಗೀತೆ.
125 ಯೆಹೋವನಲ್ಲಿ ಭರವಸವಿಟ್ಟಿರುವವರು ಚೀಯೋನ್ ಪರ್ವತದಂತಿರುವರು.
ಅವರೆಂದಿಗೂ ಕದಲದೆ ಶಾಶ್ವತವಾಗಿರುವರು.
2 ಪರ್ವತಗಳು ಜೆರುಸಲೇಮಿನ ಸುತ್ತಲೂ ಇವೆ.
ಯೆಹೋವನು ತನ್ನ ಜನರ ಸುತ್ತಲೂ ಇರುವನು.
ಆತನು ತನ್ನ ಜನರನ್ನು ಸದಾಕಾಲ ಸಂರಕ್ಷಿಸುವನು.
3 ದುಷ್ಟರು ನೀತಿವಂತರನ್ನು ಶಾಶ್ವತವಾಗಿ ಆಳುವುದಿಲ್ಲ.
ಅವರು ಶಾಶ್ವತವಾಗಿ ಆಳಿದರೆ ನೀತಿವಂತರೂ ದುಷ್ಕೃತ್ಯಗಳನ್ನು ಮಾಡತೊಡಗಬಹುದು.
4 ಯೆಹೋವನೇ, ನೀತಿವಂತರಿಗೂ
ಯಥಾರ್ಥವಂತರಿಗೂ ಉಪಕಾರಮಾಡು.
5 ದುಷ್ಟರು ಕುತಂತ್ರಗಳನ್ನು ಮಾಡುವರು.
ಯೆಹೋವನು ಅವರನ್ನು ದಂಡಿಸುವನು.
ಇಸ್ರೇಲಿನಲ್ಲಿ ಶಾಂತಿ ನೆಲೆಸಿರಲಿ.
ಎಲೀಯನು ಮತ್ತು ಬಾಳನ ಪ್ರವಾದಿಗಳು
18 ಬರಗಾಲದ ಮೂರನೆ ವರ್ಷದಲ್ಲಿ ಯೆಹೋವನು ಎಲೀಯನಿಗೆ, “ಹೋಗಿ, ರಾಜನಾದ ಅಹಾಬನನ್ನು ಭೇಟಿಮಾಡು. ನಾನು ಬೇಗ ಮಳೆಯನ್ನು ಸುರಿಸುತ್ತೇನೆ” ಎಂದು ಹೇಳಿದನು. 2 ಎಲೀಯನು ಅಹಾಬನನ್ನು ಭೇಟಿಮಾಡಲು ಹೋದನು.
ಆಗ ಸಮಾರ್ಯದಲ್ಲಿ ಆಹಾರವಿರಲಿಲ್ಲ. 3 ರಾಜನಾದ ಅಹಾಬನು ಓಬದ್ಯನನ್ನು ತನ್ನ ಬಳಿಗೆ ಕರೆಯಿಸಿದನು. ಓಬದ್ಯನು ರಾಜನ ಅರಮನೆಯ ಮೇಲ್ವಿಚಾರಕನಾಗಿದ್ದನು. (ಓಬದ್ಯನು ಯೆಹೋವನ ನಿಜವಾದ ಹಿಂಬಾಲಕರಲ್ಲಿ ಒಬ್ಬನಾಗಿದ್ದನು. 4 ಒಂದು ಕಾಲದಲ್ಲಿ ಈಜೆಬೆಲಳು ಯೆಹೋವನ ಪ್ರವಾದಿಗಳನ್ನೆಲ್ಲ ಕೊಲ್ಲುತ್ತಿದ್ದಳು. ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ಕರೆದೊಯ್ದು, ಅವರನ್ನು ಗುಹೆಗಳಲ್ಲಿ ಅಡಗಿಸಿಟ್ಟನು. ಓಬದ್ಯನು ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿ ಪ್ರವಾದಿಗಳನ್ನು ಮತ್ತೊಂದು ಗುಹೆಯಲ್ಲಿಯೂ ಇಟ್ಟನು. ಓಬದ್ಯನು ಅವರಿಗೆ ಆಹಾರವನ್ನೂ ನೀರನ್ನೂ ಒದಗಿಸುತ್ತಿದ್ದನು.) 5 ರಾಜನಾದ ಅಹಾಬನು ಓಬದ್ಯನಿಗೆ, “ನನ್ನ ಜೊತೆಯಲ್ಲಿ ಬಾ. ನಾವು ದೇಶದಲ್ಲಿರುವ ಪ್ರತಿಯೊಂದು ನೀರಿನ ಬುಗ್ಗೆಗಳಿಗೂ ತೊರೆಗಳಿಗೂ ಹೋಗಿ ನಮ್ಮ ಕುದುರೆಗಳಿಗೂ ಹೇಸರಕತ್ತೆಗಳಿಗೂ ಸಾಕಷ್ಟು ಹುಲ್ಲು ಸಿಕ್ಕುತ್ತದೆಯೋ ನೋಡಿಕೊಂಡು ಬರೋಣ. ಸಿಕ್ಕುವುದಾದರೆ, ನಮ್ಮ ಪಶುಗಳು ಸಾಯುವುದಿಲ್ಲ” ಎಂದು ಹೇಳಿದನು. 6 ಅಂತೆಯೇ ನೀರನ್ನು ಕಂಡುಕೊಳ್ಳಲು ದೇಶದ ಒಂದು ಕಡೆಗೆ ಅಹಾಬನು, ಮತ್ತೊಂದು ಕಡೆಗೆ ಓಬದ್ಯನು ಹೊರಟರು. ಅವರಿಬ್ಬರೂ ದೇಶವನ್ನೆಲ್ಲಾ ಸಂಚರಿಸಿದರು. 7 ಓಬದ್ಯನು ಸಂಚರಿಸುತ್ತಿರುವಾಗ ಎಲೀಯನನ್ನು ಭೇಟಿಯಾದನು. ಓಬದ್ಯನು ಎಲೀಯನನ್ನು ಕಂಡ ಕೂಡಲೇ ಅವನನ್ನು ಗುರುತಿಸಿ ಎಲೀಯನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನಾದ ಎಲೀಯನು ನೀನೋ?” ಎಂದು ಕೇಳಿದನು.
8 ಎಲೀಯನು, “ಹೌದು, ನಾನೇ. ಹೋಗಿ, ನಿನ್ನ ಒಡೆಯನಾದ ರಾಜನಿಗೆ ನಾನಿಲ್ಲಿದ್ದೇನೆಂದು ಹೇಳು” ಎಂದು ಉತ್ತರಿಸಿದನು.
9 ಆಗ ಓಬದ್ಯನು, “ನೀನು ಎಲ್ಲಿರುವೆ ಎಂಬುದು ನನಗೆ ತಿಳಿದಿದೆಯೆಂದು ನಾನು ರಾಜನಿಗೆ ಹೇಳಿದರೆ, ಅವನು ನನ್ನನ್ನು ಕೊಂದುಬಿಡುತ್ತಾನೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ನೀನೇಕೆ ನನ್ನನ್ನು ಸಾಯಿಸಬೇಕೆಂದಿರುವೆ? 10 ನಿನ್ನ ದೇವರಾದ ಯೆಹೋವನಾಣೆ, ರಾಜನು ನಿನಗಾಗಿ ಎಲ್ಲಾ ಕಡೆಯೂ ಹುಡುಕುತ್ತಿದ್ದಾನೆ! ಅವನು ನಿನ್ನನ್ನು ಕಂಡುಹಿಡಿಯಲು ಎಲ್ಲಾ ದೇಶಗಳಿಗೂ ಜನರನ್ನು ಕಳುಹಿಸಿದ್ದಾನೆ. ಒಂದು ದೇಶದ ಅಧಿಪತಿಯು ನಮ್ಮ ದೇಶದಲ್ಲಿ ಎಲೀಯನು ಇಲ್ಲವೆಂದು ಹೇಳಿದರೆ ಆ ಮಾತು ಸತ್ಯವೊ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ಅಹಾಬನು ಆ ಅಧಿಪತಿಯಿಂದ ಪ್ರಮಾಣ ಮಾಡಿಸುತ್ತಾನೆ. 11 ಈಗ ನೀನು ಇಲ್ಲಿರುವೆಯೆಂಬುದನ್ನು ನಾನು ಹೋಗಿ ಅವನಿಗೆ ತಿಳಿಸುವಂತೆ, ನೀನು ಇಚ್ಛಿಸಿರುವೆಯಲ್ಲವೇ? 12 ನಾನು ಹೋಗಿ ರಾಜನಾದ ಅಹಾಬನಿಗೆ ನೀನು ಇಲ್ಲಿರುವೆಯೆಂಬುದನ್ನು ತಿಳಿಸಿದರೆ, ನಂತರ ಯೆಹೋವನು ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದೊಯ್ಯುವನು. ರಾಜನಾದ ಅಹಾಬನು ಇಲ್ಲಿಗೆ ಬಂದಾಗ, ನಿನ್ನನ್ನು ಕಂಡುಹಿಡಿಯಲು ಸಮರ್ಥನಾಗುವುದಿಲ್ಲ. ಆಗ ಅವನು ನನ್ನನ್ನು ಕೊಂದುಬಿಡುತ್ತಾನೆ! ನನ್ನ ಬಾಲ್ಯದಿಂದಲೂ ನಾನು ಯೆಹೋವನನ್ನೇ ಅನುಸರಿಸುತ್ತಿದ್ದೇನೆ. 13 ನಾನು ಏನು ಮಾಡಿದೆನೆಂಬುದು ನಿನಗೆ ತಿಳಿಯಲಿಲ್ಲವೇ? ಯೆಹೋವನ ಪ್ರವಾದಿಗಳನ್ನು ಈಜೆಬೆಲಳು ಕೊಲ್ಲುತ್ತಿದ್ದಾಗ ನೂರು ಮಂದಿ ಪ್ರವಾದಿಗಳನ್ನು ನಾನು ಗುಹೆಗಳಲ್ಲಿ ಅಡಗಿಸಿಟ್ಟೆನು. ಐವತ್ತು ಮಂದಿ ಪ್ರವಾದಿಗಳನ್ನು ಒಂದು ಗುಹೆಯಲ್ಲಿಯೂ ಉಳಿದ ಐವತ್ತು ಮಂದಿಯನ್ನು ಮತ್ತೊಂದು ಗುಹೆಯಲ್ಲಿಯೂ ನಾನು ಅಡಗಿಸಿಟ್ಟೆನು. ಅವರಿಗೆ ಆಹಾರವನ್ನೂ ನೀರನ್ನೂ ನಾನು ತಂದುಕೊಡುತ್ತಿದ್ದೆನು. 14 ಈಗ ನಿನ್ನ ಅಪೇಕ್ಷೆಯಂತೆ ನಾನು ಹೋಗಿ, ನೀನು ಇಲ್ಲಿರುವೆ ಎಂಬುದನ್ನು ರಾಜನಿಗೆ ತಿಳಿಸಿದರೆ, ರಾಜನು ನನ್ನನ್ನು ಕೊಂದು ಹಾಕುತ್ತಾನೆ” ಎಂದು ಹೇಳಿದನು.
15 ಎಲೀಯನು, “ನಾನು ಸೇವೆ ಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ಈ ದಿನ ನಾನು ರಾಜನ ಎದುರಿನಲ್ಲಿ ಹಾಜರಾಗುತ್ತೇನೆ ಎಂಬುದಾಗಿ ಪ್ರಮಾಣ ಮಾಡುತ್ತೇನೆ” ಎಂದನು.
16 ಓಬದ್ಯನು ರಾಜನಾದ ಅಹಾಬನ ಬಳಿಗೆ ಹೋಗಿ ಎಲೀಯನು ಇರುವ ಸ್ಥಳವನ್ನು ತಿಳಿಸಿದನು. ರಾಜನಾದ ಅಹಾಬನು ಎಲೀಯನನ್ನು ಭೇಟಿಮಾಡಲು ಹೋದನು.
17 ಅಹಾಬನು ಎಲೀಯನನ್ನು ಕಂಡು, “ಇಸ್ರೇಲಿಗೆ ತೊಂದರೆ ಕೊಡುವವನು ನೀನೇ ಅಲ್ಲವೇ?” ಎಂದನು.
18 ಎಲೀಯನು, “ಇಸ್ರೇಲಿನ ತೊಂದರೆಗೆ ನಾನು ಕಾರಣನಲ್ಲ. ನೀನು ಮತ್ತು ನಿನ್ನ ತಂದೆಯ ಕುಟುಂಬವು ಈ ತೊಂದರೆಗಳಿಗೆಲ್ಲ ಕಾರಣ. ಯೆಹೋವನ ಆಜ್ಞೆಗಳಿಗೆ ವಿಧೇಯನಾಗದೆ ಸುಳ್ಳುದೇವರುಗಳನ್ನು ಅನುಸರಿಸತೊಡಗಿದ್ದರಿಂದ ಆ ತೊಂದರೆಗಳಿಗೆಲ್ಲಾ ನೀನೇ ಕಾರಣನಾಗಿರುವೆ.
ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ
10 ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ. 11 ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು. 12 ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ. 13 ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.
14 ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು 15 ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ. 16 ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು. 17 ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.
Kannada Holy Bible: Easy-to-Read Version. All rights reserved. © 1997 Bible League International