Revised Common Lectionary (Semicontinuous)
148 ಯೆಹೋವನಿಗೆ ಸ್ತೋತ್ರವಾಗಲಿ!
ಮೇಲೋಕದಲ್ಲಿರುವ ದೇವದೂತರೇ, ಆಕಾಶಮಂಡಲದಿಂದ ಯೆಹೋವನನ್ನು ಸ್ತುತಿಸಿರಿ!
2 ಎಲ್ಲಾ ದೂತರುಗಳೇ, ಆತನಿಗೆ ಸ್ತೋತ್ರಮಾಡಿರಿ!
ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ!
3 ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ!
ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ!
ಆತನಿಗೆ ಸ್ತೋತ್ರಮಾಡಿರಿ!
ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ!
4 ಉನ್ನತೋನ್ನತವಾದ ಆಕಾಶವೇ, ಆತನನ್ನು ಸ್ತುತಿಸು!
ಆಕಾಶದ ಮೇಲಿರುವ ನೀರುಗಳೇ ಆತನನ್ನು ಸ್ತುತಿಸಿರಿ!
5 ಅವು ಯೆಹೋವನ ಹೆಸರನ್ನು ಸ್ತುತಿಸಲಿ.
ಆತನು ಆಜ್ಞಾಪಿಸಲು ಅವುಗಳೆಲ್ಲಾ ಸೃಷ್ಟಿಯಾದವು!
6 ಇವುಗಳೆಲ್ಲಾ ಶಾಶ್ವತವಾಗಿರುವಂತೆ ಆತನು ಮಾಡಿದನು.
ಎಂದಿಗೂ ಕೊನೆಗೊಳ್ಳದ ನಿಯಮಗಳನ್ನು ಆತನು ಮಾಡಿದನು.
7 ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ!
ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ!
8 ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ
ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.
9 ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ
ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.
10 ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.
11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ
ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.
12 ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ
ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.
13 ಯೆಹೋವನ ಹೆಸರನ್ನು ಕೊಂಡಾಡಿರಿ!
ಆತನ ಹೆಸರನ್ನು ಶಾಶ್ವತವಾಗಿ ಸನ್ಮಾನಿಸಿರಿ!
ಭೂಮ್ಯಾಕಾಶಗಳಲ್ಲಿರುವ ಸಮಸ್ತವೇ, ಆತನನ್ನು ಸ್ತುತಿಸು!
14 ಆತನು ತನ್ನ ಜನರನ್ನು ಬಲಿಷ್ಠರನ್ನಾಗಿ ಮಾಡುತ್ತಾನೆ.
ಆತನ ಭಕ್ತರನ್ನು ಜನರು ಹೊಗಳುವರು.
ಜನರು ಇಸ್ರೇಲರನ್ನು ಹೊಗಳುವರು.
ಆತನು ಹೋರಾಡುತ್ತಿರುವುದು ಅವರಿಗಾಗಿಯೇ.
ಯೆಹೋವನಿಗೆ ಸ್ತೋತ್ರವಾಗಲಿ!
ಜ್ಞಾನ ಮತ್ತು ಮೂರ್ಖತನ
9 ಜ್ಞಾನವೆಂಬಾಕೆ ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ. ಆಕೆ ಅದಕ್ಕೆ ಏಳು ಕಂಬಗಳನ್ನು ಹಾಕಿದ್ದಾಳೆ. 2 ಜ್ಞಾನವೆಂಬಾಕೆ ಮಾಂಸದ ಅಡಿಗೆಯನ್ನೂ ದ್ರಾಕ್ಷಾರಸವನ್ನೂ ತಯಾರಿಸಿದ್ದಾಳೆ. ಆಕೆ ತನ್ನ ಮೇಜಿನ ಮೇಲೆ ಆಹಾರವನ್ನು ಇಟ್ಟಿದ್ದಾಳೆ. 3 ಆಮೇಲೆ ಆಕೆ, ತನ್ನ ಸೇವಕಿಯರನ್ನು ಕಳುಹಿಸಿ ನಗರದ ಎತ್ತರವಾದ ಸ್ಥಳದಿಂದ, 4 “ಕಲಿತುಕೊಳ್ಳಬೇಕಾಗಿರುವ ಜನರೇ, ಬನ್ನಿರಿ” ಎಂದು ಕೂಗುತ್ತಾಳೆ. ಆಕೆಯು ಬುದ್ಧಿಹೀನರಿಗೆ, 5 “ಬನ್ನಿರಿ, ನನ್ನ ಜ್ಞಾನದ ಆಹಾರವನ್ನು ತಿನ್ನಿರಿ. ನಾನು ತಯಾರಿಸಿರುವ ದ್ರಾಕ್ಷಾರಸವನ್ನು ಕುಡಿಯಿರಿ. 6 ನಿಮ್ಮ ಮೂರ್ಖ ಮಾರ್ಗಗಳನ್ನು ತೊರೆದುಬಿಡಿ. ಆಗ ನಿಮಗೆ ಜೀವವು ದೊರೆಯುವುದು. ವಿವೇಕಮಾರ್ಗದಲ್ಲಿ ಮುಂದೆ ಸಾಗಿರಿ” ಎಂದು ಆಕೆ ಹೇಳಿದಳು.
7 ನೀನು ಅಹಂಕಾರಿಗೆ ಅವನ ತಪ್ಪನ್ನು ತಿಳಿಸಲು ಪ್ರಯತ್ನಿಸಿದರೆ ಅವನು ನಿನ್ನನ್ನೇ ಖಂಡಿಸುವನು. ನೀನು ಕೆಡುಕನಿಗೆ ಅವನ ತಪ್ಪನ್ನು ತಿಳಿಸಿದರೆ ಅವನು ನಿನ್ನನ್ನೇ ಗೇಲಿಮಾಡುವನು. 8 ದುರಾಭಿಮಾನಿಯನ್ನು ಗದರಿಸಬೇಡ; ಅವನು ನಿನ್ನನ್ನೇ ದ್ವೇಷ ಮಾಡುವನು. ಆದರೆ ನೀನು ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿಸುವನು. 9 ನೀನು ಜ್ಞಾನಿಗೆ ಉಪದೇಶಿಸಿದರೆ ಅವನು ಮತ್ತಷ್ಟು ಜ್ಞಾನಿಯಾಗುವನು. ನೀನು ನೀತಿವಂತನಿಗೆ ಬೋಧಿಸಿದರೆ, ಅವನು ಮತ್ತಷ್ಟು ತಿಳುವಳಿಕೆಯನ್ನು ಪಡೆದುಕೊಳ್ಳುವನು.
10 ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನದ ಮೂಲ. ಯೆಹೋವನ ತಿಳುವಳಿಕೆಯನ್ನು ಪಡೆದುಕೊಳ್ಳುವುದೇ ವಿವೇಕದ ಮೂಲ. 11 ನೀನು ಜ್ಞಾನಿಯಾಗಿದ್ದರೆ, ಬಹುಕಾಲ ಬದುಕುವೆ. 12 ನೀನು ಜ್ಞಾನಿಯಾಗಿದ್ದರೆ ನಿನ್ನ ಜ್ಞಾನವು ನಿನಗೇ ಲಾಭಕರ. ಆದರೆ ನೀನು ದುರಾಭಿಮಾನದಿಂದ ಬೇರೆಯವರನ್ನು ಗೇಲಿಮಾಡಿದರೆ ನಿನ್ನನ್ನೇ ಕಷ್ಟಕ್ಕೆ ಗುರಿಮಾಡಿಕೊಳ್ಳುವೆ.
8 ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.(A) 9 ಕೆಲವು ಜನರು ತಿಳಿದುಕೊಂಡಿರುವಂತೆ, ಪ್ರಭುವು ತಾನು ವಾಗ್ದಾನ ಮಾಡಿದ್ದನ್ನು ತಡವಾಗಿ ನೆರವೇರಿಸುವುದಿಲ್ಲ. ದೇವರು ನಿಮ್ಮ ವಿಷಯದಲ್ಲಿ ಇನ್ನೂ ತಾಳ್ಮೆಯಿಂದಿದ್ದಾನಷ್ಟೆ. ಯಾವ ವ್ಯಕ್ತಿಯೂ ಕಳೆದುಹೋಗಬಾರದೆಂಬುದು ದೇವರ ಅಪೇಕ್ಷೆಯಾಗಿದೆ. ಪ್ರತಿಯೊಬ್ಬರೂ ತಮ್ಮ ಹೃದಯಗಳನ್ನು ಪರಿವರ್ತಿಸಿಕೊಂಡು, ಪಾಪ ಮಾಡುವುದನ್ನು ನಿಲ್ಲಿಸಬೇಕೆಂಬುದು ದೇವರ ಅಪೇಕ್ಷೆ.
10 ಆದರೆ ಪ್ರಭುವು ಮತ್ತೆ ಪ್ರತ್ಯಕ್ಷನಾಗುವ ದಿನವು ಕಳ್ಳನು ಬರುವಂತೆ ಅನಿರೀಕ್ಷಿತವಾಗಿ ಬರುತ್ತದೆ. ಆಕಾಶವು ಮಹಾ ಘೋಷದೊಂದಿಗೆ ಅದೃಶ್ಯವಾಗುತ್ತದೆ. ಆಕಾಶಮಂಡಲದಲ್ಲಿರುವ ಎಲ್ಲಾ ಸೃಷ್ಟಿಗಳು ಬೆಂಕಿಯಿಂದ ನಾಶವಾಗುತ್ತವೆ. ಈ ಲೋಕವೂ ಅದರಲ್ಲಿರುವ ಸಮಸ್ತವೂ ಸುಟ್ಟುಹೋಗುತ್ತದೆ. 11 ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದ್ದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು. 12 ನೀವು ದೇವರ ದಿನಕ್ಕಾಗಿ ಅಪೇಕ್ಷಿಸುತ್ತಾ ಎದುರು ನೋಡುತ್ತಿರಬೇಕು. ಆ ದಿನವು ಬಂದಾಗ, ಆಕಾಶವು ಬೆಂಕಿಯಿಂದ ನಾಶವಾಗುತ್ತದೆ ಮತ್ತು ಆಕಾಶದಲ್ಲಿರುವ ಪ್ರತಿಯೊಂದೂ ಬೆಂಕಿಯಿಂದ ಕರಗಿ ಹೋಗುತ್ತದೆ. 13 ನಾವಾದರೋ ದೇವರು ವಾಗ್ದಾನ ಮಾಡಿರುವ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಎದುರುನೋಡುತ್ತಿದ್ದೇವೆ. ನೀತಿಯು ಅವುಗಳಲ್ಲಿ ವಾಸವಾಗಿರುವುದು.
Kannada Holy Bible: Easy-to-Read Version. All rights reserved. © 1997 Bible League International